Posts Slider

Karnataka Voice

Latest Kannada News

ನನ್ನ ಮಗ ವೆಂಟಿಲೇಟರ್ ನಲ್ಲಿದ್ದಾನೆ- ಡಿಸಿಎಂ ಕಾರಜೋಳ ಮನಮಿಡಿಯುವ ಪತ್ರ

1 min read
Spread the love

ಬೆಂಗಳೂರು: ಕಲಬುರಗಿ ಡಿಸಿಎಂ ಗೋವಿಂದ ಕಾರಜೋಳ ಬರುತ್ತಿಲ್ಲವೆಂದು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡುತ್ತಿರುವುದರಿಂದ ತೀವ್ರವಾಗಿ ಬೇಸರಗೊಂಡಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸಾರ್ವಜನಿಕವಾಗಿ ಪತ್ರವನ್ನ ಬರೆದಿದ್ದು, ತಮ್ಮ ನೋವನ್ನ ಹೇಳಿಕೊಂಡಿದ್ದಾರೆ.

ಪತ್ರದ ಸಂಪೂರ್ಣ ವಿವರ

ಸಾರ್ವಜನಿಕ ಬದುಕಿನಲ್ಲಿರುವವರ ವೈಯಕ್ತಿಕ ಸಂತಸ- ಸಂಕಟಗಳು ಸಾರ್ವಜನಿಕರಿಗೆ ಅಷ್ಟಾಗಿ ತಿಳಿದಿರುವುದಿಲ್ಲ. ಸಂತಸಗಳು ಕೆಲವೊಮ್ಮೆ ಹೊರಗೆ ಬರುತ್ತವೆ. ಆದರೆ ಸಂಕಷ್ಟಗಳು ಯಾವತ್ತಿಗೂ ಅನಾಥ. ಅದನ್ನು ಅನುಭವಿಸಿದರಿಗಷ್ಟೇ ಅದರ ಪ್ರಖರತೆ ಗೊತ್ತು. ಇದ ಪರಿಣಾಮವಾಗಿ ಸಾರ್ವಜನಿಕ ಬದುಕಿನಲ್ಲಿರುವವರ ಹಾಜರಿ ಅಥವಾ ಗೈರುಹಾಜರಿಗಳನ್ನು ಕನ್ನಡಕ ಹಾಕಿ ನೋಡುವ ಪ್ರೌವೃತ್ತಿ ಹೆಚ್ಚಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಲಾರದು.

ನನ್ನ ಪುತ್ರ ಡಾ. ಗೋಪಾಲ ಕಾರಜೋಳ ಕಳೆದ 23 ದಿನಗಳಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನನ್ನ ಧರ್ಮ ಪತ್ನಿ ಕೂಡಾ ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಆಸ್ಪತ್ರೆಯಿಂದ ಹಿಂದಿರುಗಿದ್ದಾರೆ. ನಾನೂ ಕೂಡಾ ಕೋವಿಡ್ 19ಕ್ಕೆ ಒಳಗಾಗಿ ಗುಣಮುಖನಾಗಿ ಹಿಂದಿರುಗಿದ್ದೇನೆ. ನಮ್ಮ ಕುಟುಂಬದಲ್ಲಿ ಒಟ್ಟಾರೆ 8 ಮಂದಿ ಕೊರೊನಾ ಸೋಂಕಿನಿಂದ ಒಳಗಾಗಿದ್ದೇವೆ. ಇದು ವಸ್ತುಸ್ಥಿತಿ. ಇಂತಹ ಗತ್ಯಂತರ ಸಂದರ್ಭದಲ್ಲಿ ನಾನು ಎಲ್ಲೂ ಹೊರಗಡೆ ಹೋಗುವುದು ಸೂಕ್ತವಲ್ಲ. ಅನಿವಾರ್ಯವಿದ್ದ ಪ್ರಸಂಗದಲ್ಲಿ ಮಾತ್ರ ಮುನ್ನೆಚ್ಚರಿಕೆಯಿಂದ ಆಯಾಸವಾಗದಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ವೈದ್ಯರು ಸಲಹೆ ಇದೆ. ದೂರದ ಪ್ರಯಾಣ ನಿಶಿದ್ಧ ಎಂಬುದು ವೈದ್ಯರು ಕೊಟ್ಟಿರುವ ಎಚ್ಚರಿಕೆ. ಈ ಎಲ್ಲಾ ಅಂಶಗಳು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪನವರ ಗಮನದಲ್ಲಿದೆ. ಅವರೂ ಕೂಡಾ ಆರೋಗ್ಯದ ಬಗ್ಗೆ ಕಾಳಜಿವಹಿಸುವಂತೆ ಸೂಚಿಸಿದ್ದಾರೆ. ಮಾಧ್ಯಮಗಳ ಮೂಲಕ ಮನವಿ ಮಾಡಿಕೊಳ್ಳುವುದೇನೆಂದರೆ ಪ್ರವಾಹ ಪೀಡಿತ ಜಿಲ್ಲೆಗಳಾದ ಕಲಬುರಗಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಂತ್ರಸ್ತರ ಪರಿಹಾರಕ್ಕೆ ಕೈಗೊಳ್ಳಬೇಕಾದ ಮಾರ್ಗೋಪಾಯಗಳನ್ನು ಜಿಲ್ಲಾಡಳಿತಕ್ಕೆ  ಖಚಿತವಾಗಿ ನಿರ್ದೇಶಿಸಿದ್ದೇನೆ. ಅದರ ಸತತ ಉಸ್ತುವಾರಿಯಲ್ಲಿ ಇದ್ದೇನೆ. ಪರಿಸ್ಥಿತಿಯ ಅನಿವಾರ್ಯತೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ನಾನು ಭೇಟಿ ನೀಡಿಲ್ಲದಿರಬಹುದು ಆದರೆ ಜವಾಬ್ದಾರಿಯಿಂದ ಉಪಮುಖ್ಯಮಂತ್ರಿಯಾಗಿ, ಜಿಲ್ಲಾಉಸ್ತುವಾರಿ ಸಚಿವರಾಗಿ ತ್ರಿಕರನ ಸುದ್ದಿಯಿಂದ ನೊಂದವರ ಪರಿಹಾರಕ್ಕೆ ಶ್ರಮಿಸುತ್ತಿದ್ದೇನೆ. ಮಾತುಗಳಿಂದ ಇಲ್ಲವೇ ಘೋಷಣೆಗಳಿಂದ ಅಥವಾ ಟೀಕೆ ಟಿಪ್ಪಣಿಗಳಿಂದ ಸಂತ್ರಸ್ತರ ಪರಿಹಾರ ಕಾರ್ಯ ಆಗಲಾರದು. ಅದಕ್ಕೆ ಬೇಕಾದುದು ಸರ್ಕಾರದ ದೃಢ ಸಂಕಲ್ಪ. ಈ ನಿಟ್ಟಿನಲ್ಲಿ ಯಾವುದೇ ರೀತಿಯ ಟೀಕೆ ಟಿಪ್ಪಣಿಗಳಿಗೆ ಮಾರುಹೋಗದೇ ಸರ್ಕಾರದ ವಿಶ್ವಾಸಾರ್ಹ ಕ್ರಮಗಳನ್ನು ಗಮನಿಸಬೇಕೆಂದು ನಾನು ಮನವಿ ಮಾಡುತ್ತೇನೆ.

ಯುಗಾದಿಯಿಂದ ಆರಂಭವಾದ ಈ ಕೊರೊನಾ ವೈರಾಣು ನಿವಾರಣೆ ಹಾಗೂ ನೊಂದವರ ಕಲ್ಯಾಣಕ್ಕೆ  ನಾನು ಕೈಗೊಂಡಿರುವ ಕಾರ್ಯ, ಪರಿಹಾರಕ್ರಮಗಳು ಎಲ್ಲರಿಗೂ ಗೊತ್ತಿರುವ ಸಂಗತಿ. ಕಲಬುರಗಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿದ್ದನ್ನು ಸ್ಮರಿಸಬೇಕು. 2009 ರ ಅತಿವೃಷ್ಟಿ ಸಂದರ್ಭದ ಪರಿಸ್ಥಿತಿಯಲ್ಲಿ ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಸಂತ್ರಸ್ತರ ರಕ್ಷಣಾ ಕಾರ್ಯ, ಪರಿಹಾರಕಾರ್ಯಗಳನ್ನು ಕೈಗೊಂಡಿರುವ ಕ್ರಮದ ಬಗ್ಗೆ ತಮ್ಮಲ್ಲರಿಗೂ ತಿಳಿದ ಸಂಗತಿಯಾಗಿದೆ.

ವರ್ತಮಾನದ ಒಂದು ಘಟನೆಯಿಂದಷ್ಟೇ ವ್ಯಕ್ತಿಯನ್ನು ಅಳೆಯಲು ಹೋಗಬಾರದು. ಹಿಂದಿನ ವಿದ್ಯಾಮಾನಗಳು ಈಗಿನ ಸ್ಥಿತಿಯನ್ನು ಗುರುತಿಸಲು ಯಾವತ್ತಿಗೂ ನಿರ್ಣಾಯಕ ಎಂಬುದು ನನ್ನ ತಿಳುವಳಿಕೆ. ಈ ಸಂದರ್ಭದಲ್ಲಿ ಪರಂಪರೆಯ ಬೆಳಕಿನಲ್ಲಿ ವರ್ತಮಾನದ ಕತ್ತಲನ್ನು ಓಡಿಸಿ ಭವಿಷ್ಯಕ್ಕೆ ಬೆಳಕನ್ನು ತರುವ ಕಡೆ ಸರ್ಕಾರದ ಆಡಳಿತ ಯಂತ್ರವನ್ನು ಬಳಸಿಕೊಂಡು ಮುನ್ನಡೆಯುವುದು ನಾನು ತೊಟ್ಟಿರುವ ಧೀಕ್ಷೆ. ಇದಕ್ಕೆ ಇಡೀ ಕರ್ನಾಟಕದ ಜನತೆಯ ಆರೈಕೆ/ ಹಾರೈಕೆ ಅಗತ್ಯ.

ಸೇವೆ ನನ್ನದು – ಸ್ವೀಕಾರ ನಿಮ್ಮದು

ಗೋವಿಂದ ಎಂ ಕಾರಜೋಳ

ಉಪಮುಖ್ಯಮಂತ್ರಿಗಳು


Spread the love

Leave a Reply

Your email address will not be published. Required fields are marked *