ವಾಕರಸಾ ಸಂಸ್ಥೆಯ ಬಸ್ ನಿಲ್ದಾಣಗಳಲ್ಲಿ ಸ್ಯಾನಿಟೈಜೇಷನ್
ಹುಬ್ಬಳ್ಳಿ: ರಾಜ್ಯ ಸರ್ಕಾರದ ಆದೇಶದ ಪ್ರಕಾರ ರವಿವಾರ ಲಾಕ್ ಡೌನ್ ಜಾರಿಯಾಗಿದ್ದ ಪ್ರಯುಕ್ತ ವಾಕರಸಾ ಸಂಸ್ಥೆಯ ಹುಬ್ಬಳ್ಳಿ ವಿಭಾಗದ ವ್ಯಾಪ್ತಿಯ ಎಲ್ಲಾ ಘಟಕಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಬಸ್ಸುಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಘಟಕಗಳಿಂದ ಮತ್ತು ಬಸ್ ನಿಲ್ದಾಣಗಳಿಂದ ಯಾವುದೇ ಬಸ್ಸು ರಸ್ತೆಗಿಳಿಯಲಿಲ್ಲ.
ನಿತ್ಯವೂ ಬಸ್ಸುಗಳು ಮತ್ತು ಪ್ರಯಾಣಿಕರಿಂದ ತುಂಬಿರುತ್ತಿದ್ದ ಬಸ್ ನಿಲ್ದಾಣಗಳು ಇಡೀ ದಿನ ಬಸ್ಸುಗಳಿಂದ ಹಾಗೂ ಪ್ರಯಾಣಿಕರಿಂದ ಮುಕ್ತವಾಗಿದ್ದವು. ಈ ಅವಕಾಶವನ್ನು ಬಳಸಿಕೊಂಡು ಕೊರೋನಾ ವೈರಾಣು ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕ ಪ್ರಯಾಣಿಕರ ಹಿತದೃಷ್ಟಿಯಿಂದ
ಹುಬ್ಬಳ್ಳಿಯ ಹಳೆ ಬಸ್ ನಿಲ್ದಾಣ, ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣ, ಹೊಸರು ಪ್ರಾದೇಶಿಕ ಬಸ್ ನಿಲ್ದಾಣ,ತಡಸ, ಕಲಘಟಗಿ, ಕುಂದಗೋಳ, ನವಲಗುಂದ ಮತ್ತು ಅಣ್ಣಿಗೇರಿ ಬಸ್ ನಿಲ್ದಾಣಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಯಿತು.ನಂತರ ಸೋಡಿಯಂ ಹೈಪೋಕ್ಲೋರೈಟ್ ದ್ರಾವಣ ಸಿಂಪಡಿಸಿ ಸ್ಯಾನಿಟೈಜೇಷನ್ ಮಾಡಲಾಗಿರುತ್ತದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಸಿಬ್ಬಂದಿಗಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ವಿಭಾಗೀಯ ಕಚೇರಿ, ವಿಭಾಗೀಯ ಕಾರ್ಯಾಗಾರ ಮತ್ತು ಎಲ್ಲಾ ಬಸ್ ಘಟಕಗಳನ್ನು ಸಹಾ ಸಂಪೂರ್ಣವಾಗಿ ಸ್ವಚ್ಚಗೊಳಿಸಿ ಸ್ಯಾನಿಟೇಷನ್ ಮಾಡಲಾಯಿತು.