ಕಾಂಗ್ರೆಸ್ ಕಾರ್ಯಕರ್ತರಿಗೂ ಜನಸೇವೆ ಅವಕಾಶ ಕೊಡಿ: ಸಿಎಂಗೆ ಡಿ.ಕೆ ಶಿವಕುಮಾರ್ ಪತ್ರ
1 min readಬೆಂಗಳೂರು: ಕೊರೋನಾ ಮಹಾಮಾರಿ ಎದುರಿಸುವಲ್ಲಿ ಸಾರ್ವಜನಿಕರಿಗೆ ನೆರವಾಗಲು ಕಾಂಗ್ರೆಸ್ ಕಾರ್ಯಕರ್ತರಿಗೂ ಅವಕಾಶ ನೀಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೋನಾ ನಿರ್ವಹಣೆಗೆ ಬಿಜೆಪಿ ಕಾರ್ಯಕರ್ತರನ್ನು (ಕೊರೊನಾ ವಾರಿಯರ್ಸ್) ಬಳಸಿಕೊಳ್ಳುವುದಾಗಿ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಅವರು ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಸಿಎಂಗೆ ಪತ್ರ ಬರೆದಿರುವ ಶಿವಕುಮಾರ್, ಹೇಳಿರುವುದಿಷ್ಟು:
‘ಜನಸೇವೆ ವಿಚಾರದಲ್ಲಿ ನಮ್ಮ ಪಕ್ಷ ಯಾವಾಗಲೂ ಮುಂಚೂಣಿಯಲ್ಲಿರುತ್ತದೆ. ಕೋವಿಡ್ ಸಂತ್ರಸ್ತರ ನೆರವಿಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಕ ಜಿಲ್ಲಾ, ತಾಲೂಕು ಹಾಗೂ ಪಂಚಾಯಿತಿ ಮಟ್ಟದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಹಗಲಿರುಳು ದುಡಿದು, ತನು ಮನ ಧನ ಸಹಾಯ ಮಾಡುತ್ತಿದ್ದಾರೆ.
ನಮ್ಮ ಪಕ್ಷದ ಕಾರ್ಯಕರ್ತರು ಸ್ವಯಂ ಸೇವಕರಾಗಿ ಕೆಲಸ ಮಾಡಲು ಸದಾ ಸನ್ನದ್ಧರಾಗಿದ್ದು, ಜನಸೇವೆಗೆ ಲಭ್ಯರಿದ್ದಾರೆ. ಹೀಗಾಗಿ ಸರ್ಕಾರ ಅಧಿಕೃತವಾಗಿ ನಮ್ಮ ಕಾರ್ಯಕರ್ತರಿಗೂ ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸಲು ಅವಕಾಶ ನೀಡಬೇಕು.’