Karnataka Voice

Latest Kannada News

ತಾವು ಕಂಡ ಕನಸು-ನನಸು: ನವಲಗುಂದ ಬೈಪಾಸ್‌ಗೆ ಕೇಂದ್ರ ಅಸ್ತು- ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಸಂತಸ…

327 ಕೋಟಿ ವೆಚ್ಚದ ನವಲಗುಂದ ಬೈಪಾಸ್ ರಸ್ತೆಗೆ ಅಸ್ತು

10.575 ಕಿ.ಮೀ. ರಸ್ತೆ ನಿರ್ಮಾಣಕ್ಕೆ ಕೇಂದ್ರದಿಂದ ಅನುಮೋದನೆ

ಹುಬ್ಬಳ್ಳಿ: ಸೊಲ್ಲಾಪುರ, ಸವದತ್ತಿ ಯಲ್ಲಮ್ಮನಗುಡ್ಡ ಸೇರಿದಂತೆ ವಿವಿಧ ಸುಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ನವಲಗುಂದ ಬೈಪಾಸ್‌ ರಸ್ತೆ ₹327 ಕೋಟಿ ವೆಚ್ಚದ ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಇದಕ್ಕೆ ನಿರಂತರವಾಗಿ ಪ್ರಯತ್ನ ಮಾಡಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ನಿತಿನ್ ಗಡ್ಕರಿ ಅವರಿಗೆ ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ನವಲಗುಂದ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ ಈ ಹಿಂದೆಯೇ ನಾನೂ ಸಹಿತ, ಜೋಶಿಯವರ ಜೊತೆಗೂಡಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಇದೀಗ ಕಾಮಗಾರಿಗೆ ಅನುಮೋದನೆ ದೊರಕಿದೆ. ರಾಜ್ಯ ಸರ್ಕಾರ ಟೆಂಡರ್ ಕರೆದು ಕಾರ್ಯಾರಂಭ ಮಾಡುವ ಹಂತ ತಲುಪಿದೆ ಎಂದು ತಿಳಿಸಿದ್ದಾರೆ.

ಈ ಬೈಪಾಸ್‌ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯಕ್ಕೆ ಸಲ್ಲಿಸಿದ್ದ ಜೋಡಣೆ (alignment) ಮತ್ತು DPR (ವಿವರವಾದ ಯೋಜನಾ ವರದಿ) ಅನ್ನು ಅಲೈನ್‌ಮೆಂಟ್ ಅಪ್ರೂವಲ್ ಕಮಿಟಿ (Alignment Approval Committee (AAC) ಅನುಮೋದನೆ ನೀಡಿದೆ. ನವಲಗುಂದ ಪಟ್ಟಣಕ್ಕೆ 10.575 ಕಿ.ಮೀ. ವಿಸ್ತೀರ್ಣದ ಬೈಪಾಸ್‌ ರಸ್ತೆ ನಿರ್ಮಾಣವಾಗಲಿದೆ ಎಂದಿದ್ದಾರೆ.

ಬೆಣ್ಣೆಹಳ್ಳ ಮತ್ತು ಅದನ್ನು ಸೇರುವ ಸಣ್ಣ ನಾಲಾಗಳು ಮಳೆಗಾಲದಲ್ಲಿ ತುಂಬಿ ಹರಿದು ಪ್ರವಾಹ ಪರಿಸ್ಥಿತಿ ಎದುರಾಗುತ್ತಿತ್ತು. ಇದರಿಂದ ಅಪಾರ ಕೃಷಿ ಭೂಮಿಯಲ್ಲಿ ಬೆಳೆ ಹಾನಿ ಸಂಭವಿಸುತ್ತಿತ್ತು ಮತ್ತು ಅನೇಕ ಕಡೆ ಸಂಪರ್ಕ ಕಡಿತಗೊಳ್ಳುತ್ತಿತ್ತು. ಇದನ್ನೆಲ್ಲ ಗಮನಿಸಿ ಶಾಶ್ವತ ಪರಿಹಾರ ಎನ್ನುವಂತೆ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ನಡೆಸಿದ ಪ್ರಯತ್ನಕ್ಕೆ ಇದೀಗ ಫಲ ಸಿಕ್ಕಿದೆ. ಅಲೈನ್‌ಮೆಂಟ್ ಅಪ್ರೂವಲ್ ಕಮಿಟಿ ಅನುಮತಿ ನೀಡಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ತಿಳಿಸಿದ್ದಾರೆ.

ಹೆದ್ದಾರಿಯು ನವಲಗುಂದ ಪಟ್ಟಣದ ಮಧ್ಯ ಭಾಗದಿಂದ ಹಾದು ಹೋಗುವ ಕಾರಣ ಟ್ರಾಫಿಕ್ ಸಮಸ್ಯೆಗಳಿಂದಾಗಿ ನವಲಗುಂದ ನಿವಾಸಿಗಳು ರೋಸಿ ಹೋಗಿದ್ದರು. ಹೀಗಾಗಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಬಹು ವರ್ಷಗಳಿಂದಲೂ ಇದ್ದ ಬೇಡಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಂತೆ ಹೆದ್ದಾರಿ ಸಚಿವ ನಿತಿನ ಗಡ್ಕರಿ ಅವರು ಸ್ಪಂದಿಸಿದ್ದಾರೆ. ಈ ಮೂಲಕ ಜನರ ಆಶಯ ಸಾಕಾರಗೊಂಡಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕದ ಆರಾಧ್ಯ ದೈವ ಸವದತ್ತಿ ಯಲ್ಲಮ್ಮ ದೇವಸ್ಥಾನ ಸೇರಿದಂತೆ ವಿವಿಧ ಐತಿಹಾಸಿಕ, ಧಾರ್ಮಿಕ ನಗರಗಳಿಗೆ ಸಂಪರ್ಕ ಜೋಡಿಸುತ್ತದೆ ನವಲಗುಂದ ಪಟ್ಟಣ. ಹೀಗಾಗಿ ಈ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಅಧಿಕವಾಗಿರುತ್ತದೆ. ಬೈಪಾಸ್ ರಸ್ತೆ ನಿರ್ಮಾಣದಿಂದ ಪ್ರಯಾಣಿಕರು ಮತ್ತು ಸ್ಥಳೀಯ ನಿವಾಸಿಗಳಿಗೂ ಅನುಕೂಲವಾಗಲಿದೆ ಎಂದಿದ್ದಾರೆ.

ನಾನು ಕ್ಷೇತ್ರದ ಪ್ರಮುಖ ಪಟ್ಟಣದ ಜನರ ಸಮಸ್ಯೆಯ ಜೊತೆಗೆ ಅಭಿವೃದ್ಧಿ ಕನಸು ಕಂಡಿದ್ದೆ. ಅದಕ್ಕೆ ಬೆನ್ನಲುಬಾಗಿ ನಿಂತಿದ್ದು ಹಾಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಎಂಬುದನ್ನ ಮಾಜಿ ಸಚಿವರು ಸ್ಮರಿಸಿದ್ದಾರೆ.

*ಶೀಘ್ರ ಕಾಮಗಾರಿಗೆ ಒತ್ತಾಯ:* ನವಲಗುಂದ ಬೈಪಾಸ್‌ ನಿರ್ಮಾಣ ಸಂಬಂಧ ಈಗಾಗಲೇ ಡಿಪಿಆ‌ರ್ ಸಿದ್ಧಗೊಂಡಿದ್ದು, ರಾಜ್ಯ ಸರ್ಕಾರ ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಗಳಿಗೆ ತ್ವರಿತ ಚಾಲನೆ ನೀಡಬೇಕೆಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *