ಕುಂದಗೋಳದ “ಮಕ್ಕಳಿಬ್ಬರ ದುರಂತ ಸಾವು”- ಲಾಡ್ ಪೌಂಢೇಷನ್ನಿಂದ 4 ಲಕ್ಷ ರೂ. ಪರಿಹಾರ…

ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು; ಯರಿನಾರಾಯಣಪುರ ಗ್ರಾಮಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ
ಪಾಲಕರು, ಗ್ರಾಮಸ್ಥರು ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ
ಸಂತೋಷ್ ಲಾಡ್ ಫೌಂಡೇಶನ್ ನಿಂದ ಮೃತರ ಕುಟುಂಬಸ್ಥರಿಗೆ ರೂ.4 ಲಕ್ಷ ಸಹಾಯಧನ
ಗ್ರಾಮದ ಕೆರೆಗೆ ತಡೆಗೋಡೆ ನಿರ್ಮಿಸಲು ಕ್ರಮ
ಹುಬ್ಬಳ್ಳಿ: ಜಿಲ್ಲೆಯಲ್ಲಿ ಸಾಕಷ್ಟು ಕೆರೆಗಳಿವೆ ಇವುಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು.
ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮಕ್ಕೆ ಭೇಟಿ ನೀಡಿ, ಮೊನ್ನೆ (ಜೂನ್ 19) ಕೆರೆಯಲ್ಲಿ ಮೃತರಾದ ಮಕ್ಕಳ ಮನೆಗೆ ತೆರಳಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಮಳೆಗಾಲದ ಸಂದರ್ಭದಲ್ಲಿ ಗ್ರಾಮೀಣ ಭಾಗದ ಕೆರೆಗಳು ಭರ್ತಿಯಾಗುತ್ತವೆ. ಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮಕ್ಕಳು ಓಡಾಡದಂತೆ ಮೊದಲೇ ಸಾರ್ವಜನಿಕರು, ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿನ ಕೆರೆಗಳಿಗೆ ತಡೆಗೋಡೆ ನಿರ್ಮಾಣ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ. ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಸೂಚನೆ ನೀಡಲಾಗಿದೆ. ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ಸಹ ಕೊಡಲಾಗಿದೆ. ಜನರಿಗೆ ಈ ಕುರಿತು ಜಾಗೃತಿ ಮೂಡಿಸಲಾಗುವುದು. ಜಿಲ್ಲ ಪಂಚಾಯತ, ಜಿಲ್ಲಾಡಳಿತದಿಂದ ಕೆರೆಗಳ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.
ಗುಡೇನಕಟ್ಟಿ ಗ್ರಾಮ ಪಂಚಾಯತ ವ್ಯಾಪ್ತಿಗೆ ಒಳಪಡುವ ಯರಿನಾರಾಯಣಪುರ ಗ್ರಾಮದ ಕೆರೆಗೆ ಈಗಾಗಲೇ ರೂ. 50 ಲಕ್ಷ ಅನುದಾನವನ್ನು ನೀಡಲಾಗಿತ್ತು. ಕೆರೆ ಕೂಡ ಬಹಳಷ್ಟು ದೊಡ್ಡದಾಗಿದೆ. ತಡೆಗೋಡೆ ನಿರ್ಮಾಣ ಮಾಡಿದರೂ ಸಹ ಮಕ್ಕಳು ಕೆರೆ ಕಡೆಗೆ ಹೋಗದಂತೆ ಪಾಲಕರು ಎಚ್ಚರ ವಹಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಸುಮಾರು 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಕೆರೆಯ ದಾರಿಯಲ್ಲಿ ಮಕ್ಕಳು ಚಲಿಸದಂತೆ ಎಚ್ಚರ ವಹಿಸಿದ್ದರೂ ಕೂಡ ಮಕ್ಕಳು ಕೆರೆಯ ಕಡೆಗೆ ತೆರಳುತ್ತಿದ್ದಾರೆ. ಇದರಿಂದ ಈ ಅವಘಡ ಸಂಭವಿಸಿದೆ ಎಂದರು.
ಜಿಲ್ಲಾಡಳಿತದಿಂದ ಕೆರೆಗೆ ತಡೆಗೋಡೆ ನಿರ್ಮಾಣ: ಯರಿನಾರಾಯಣಪುರ ಗ್ರಾಮದ ಕೆರೆಗೆ ಜಿಲ್ಲಾಡಳಿತದಿಂದ ತಡೆಗೋಡೆ ನಿರ್ಮಾಣ ಮಾಡಲಾಗುವುದು. ತಡೆಗೋಡೆ ನಿರ್ಮಾಣ ಮಾಡಿದರೂ ಸಹ ಇಂತಹ ಅವಘಡಗಳನ್ನು ತಡೆಯಲಾಗುವುದಿಲ್ಲ. ಗ್ರಾಮ ಪಂಚಾಯತ, ತಾಲೂಕು ಪಂಚಾಯತ ಹಾಗೂ ಶಾಸಕರ ಅನುದಾನದಿಂದ ತಡೆಗೋಡೆ ನಿರ್ಮಾಣ ಮಾಡಬಹುದಾಗಿತ್ತು. ತಡೆಗೋಡೆ ನಿರ್ಮಾಣದಿಂದ ಸಮಸ್ಯೆಗಳು ಪರಿಹರಿಯುವುದಿಲ್ಲ. ಗ್ರಾಮಸ್ಥರು ಸಹ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅವರು ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ಅಂಗನವಾಡಿ ಕೇಂದ್ರ ಸ್ಥಳಾಂತರ: ಯರಿನಾರಾಯಣಪುರ ಗ್ರಾಮದ ಕೆರೆಯ ಪಕ್ಕದಲ್ಲಿರುವ ಅಂಗನವಾಡಿ ಕೇಂದ್ರವನ್ನು ಸ್ಥಳಾಂತರ ಮಾಡಲಾಗುವುದು. ಇದರಿಂದ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಗಳು ಆಗುವುದಿಲ್ಲ. ಮಕ್ಕಳನ್ನು ಕಾಪಾಡುವುದು ಪಾಲಕರು ಮತ್ತು ಗ್ರಾಮಸ್ಥರ ಜವಾಬ್ದಾರಿಯಾಗಿದೆ. ಅಂಗನವಾಡಿ ಕೇಂದ್ರಗಳ ಬಗ್ಗೆ ಗಮನ ಹರಿಸುವುದು ಅಗತ್ಯವಿದೆ ಎಂದರು.
ಕುಟುಂಬಸ್ಥರಿಗೆ ಪರಿಹಾರ ಕೊಡಿಸಲು ಮುಖ್ಯಮಂತ್ರಿಗಳಲ್ಲಿ ಮನವಿ: ಮೃತ ಮಕ್ಕಳ ಕುಟುಂಬಸ್ಥರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳನ್ನು ಸ್ವತಃ ಭೇಟಿ ಮಾಡಿ, ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.
ಸಂತೋಷ್ ಲಾಡ್ ಫೌಂಡೇಶನ್ ನಿಂದ ಧನ ಸಹಾಯ: ಸಂತೋಷ ಲಾಡ್ ಫೌಂಡೇಶನ್ ನಿಂದ ಮೃತರ ಕುಟುಂಬಸ್ಥರಿಗೆ ರೂ.4 ಲಕ್ಷ ಸಹಾಯಧನವನ್ನು ವಿತರಣೆ ಮಾಡಿದರು. ಕುಟುಂಬಸ್ಥರು ಹೆಚ್ಚಿನ ಧೈರ್ಯ ತಂದುಕೊಳ್ಳಬೇಕು ಎಂದು ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಎಂ.ಆರ್.ಪಾಟೀಲ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ. ಆರ್.ಜೆ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ್ ಬ್ಯಾಕೋಡ, ಮಾಜಿ ಶಾಸಕರಾದ ಎಂ.ಎಸ್.ಅಕ್ಕಿ, ಕುಸುಮಾವತಿ ಶಿವಳ್ಳಿ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತಿಕಾ ವರ್ಮಾ, ತಹಶೀಲ್ದಾರರಾದ ರಾಜು ಮಾವರಕರ, ತಾಲೂಕು ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ ಕಮ್ಮಾರ, ಎಸಿಪಿ ವಿನೋದ ಮುಕ್ತೇದಾರ, ಡಿಡಿಪಿಐ ಎಸ್.ಎಸ್.ಕೆಳದಿಮಠ ಮತ್ತಿತರರು ಉಪಸ್ಥಿತರಿದ್ದರು.