25 ಎಕರೆ ಭೂಮಿ, 28 ಜನ, 6 ಹತ್ಯೆ- ಕಲ್ಲನಗೌಡ ಪಾಟೀಲ ಟೀಂನಿಂದ ಕೃತ್ಯ ಶಂಕೆ
ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಕೇವಲ 25 ಎಕರೆ ಜಮೀನಿನ ವಿವಾದಕ್ಕಾಗಿ ಆರು ಜನರನ್ನು ಭೀಕರವಾಗಿ ಕೊಲೆ ಮಾಡಲಾಗಿರುವ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲಕ್ಷ್ಮಣ ನಿಂಬರಗಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಗ್ರಾಮದ ಜಮೀನೊಂದರಲ್ಲಿ ಎಂಟು ಜನರು ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ, ಏಕಾಏಕಿ ಬೈಕ್ಗಳಲ್ಲಿ ಬಂದ 28 ಜನರ ಗುಂಪೊಂದು ಮಚ್ಚು ಹಾಗೂ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ನಡೆಸಿದೆ. ದಾಳಿಯ ತೀವ್ರತೆಗೆ ಆರು ಜನರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ತೀವ್ರವಾಗಿ ಗಾಯಗೊಂಡಿರುವ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
”ಮೇಲ್ನೋಟಕ್ಕೆ ಯಾವುದೇ ರೀತಿಯ ಗುಂಡಿನ ದಾಳಿ (ಫೈರಿಂಗ್) ನಡೆದಿಲ್ಲ. ಆದರೆ, ಮರಣೋತ್ತರ ಪರೀಕ್ಷೆಯ (ಪೋಸ್ಟ್ಮಾರ್ಟಂ) ವರದಿ ಬಂದ ಬಳಿಕವಷ್ಟೇ ನಿಖರ ಮಾಹಿತಿ ತಿಳಿಯಲಿದೆ. ಸದ್ಯ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ,” ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.
