ಧಾರವಾಡದಲ್ಲಿ “ಜೈಲರ್” ನೇಣಿಗೆ: ಕಣ್ಣೀರಿಟ್ಟ ಎರಡು ಮಕ್ಕಳ ತಾಯಿ..
ಧಾರವಾಡ: ಇಲ್ಲಿನ ಕೇಂದ್ರ ಕಾರಾಗೃಹದ ಜೈಲರ್ ಒಬ್ಬರು ಕ್ವಾರ್ಟರ್ಸ್ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.
ಧಾರವಾಡ ಕೇಂದ್ರ ಕಾರಾಗೃಹದ ಜೈಲರ್ ಸಿದ್ಧರಾಮಪ್ಪ ವಡ್ಡರ್ (೩೩) ಆತ್ಮಹತ್ಯೆಗೆ ಶರಣಾದವರು.

ಕಳೆದ ಎರಡು ತಿಂಗಳ ಹಿಂದೆ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಿದ್ಧರಾಮಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಬಳಿಕ ಅವರನ್ನು ಮೈಸೂರು ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತಾದರೂ, ಅವರು ಇನ್ನು ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಂಡಿರಲಿಲ್ಲ ಎಂದು ಮೂಲಗಳು ತಿಳಿಸಿವೆ.
ಸಿದ್ಧರಾಮಪ್ಪ ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಬೇರೆ ಊರಿಗೆ ಹೋಗಿದ್ದರು. ಶುಕ್ರವಾರ ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಅವರು ನೇಣು ಬಿಗಿದುಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಸ್ಥಳಕ್ಕೆ ಭೇಟಿ ನೀಡಿರುವ ಧಾರವಾಡ ಉಪನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
