ಕಲಘಟಗಿ: PDO ಯಂಕಪ್ಪ ಹೊಟ್ಟಿಗೌಡರ ಅಮಾನತ್ತು ಮಾಡಿದ ಜಿಪಂ CEO
ಕರ್ತವ್ಯ ಲೋಪ: ಕಲಘಟಗಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಯಂಕಪ್ಪ ಅಮಾನತು
ಧಾರವಾಡ: ಕರ್ತವ್ಯ ಲೋಪ ಎಸಗಿದ ಹಾಗೂ ನಿಯಮಾವಳಿಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ) ಯಂಕಪ್ಪ ಎಚ್. ಹೊಟ್ಟಿಗೌಡರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಯಂಕಪ್ಪ ಅವರು ಈ ಹಿಂದೆ ಉಗ್ನಿಕೇರಿ ಗ್ರಾಮ ಪಂಚಾಯಿತಿಯಲ್ಲಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕರ್ತವ್ಯ ಲೋಪ ಎಸಗಿದ್ದು, ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು 2021ರ ನಿಯಮ 3 (1) (i) (ii) (iii) ಅನ್ನು ಸಂಪೂರ್ಣವಾಗಿ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ನಾಗರಿಕ ಸೇವಾ ನಿಯಮಗಳು 1957ರ ನಿಯಮ 10 (1) (ಡ) ಅನ್ವಯ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಅವರನ್ನು ಅಮಾನತ್ತಿನಲ್ಲಿಡಲಾಗಿದೆ.
ಪ್ರಮುಖ ನಿರ್ದೇಶನಗಳು:
- ಹೆಚ್ಚುವರಿ ಪ್ರಭಾರ: ಅಮಾನತುಗೊಂಡ ಅಧಿಕಾರಿಯ ಸ್ಥಾನಕ್ಕೆ ಬೇರೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಹೆಚ್ಚುವರಿ ಜವಾಬ್ದಾರಿ ವಹಿಸಲು ಕಲಘಟಗಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ.
- ಕೇಂದ್ರಸ್ಥಾನ ಬಿಡುವಂತಿಲ್ಲ: ಅಮಾನತ್ತಿನ ಅವಧಿಯಲ್ಲಿ ಸದರಿ ಅಧಿಕಾರಿಗಳು ಜೀವನಾಂಶ ಭತ್ಯೆಗೆ ಅರ್ಹರಿರುತ್ತಾರೆ. ಆದರೆ, ಮೇಲಾಧಿಕಾರಿಗಳ ಪೂರ್ವಾನುಮತಿ ಪಡೆಯದೇ ತಮ್ಮ ಕೇಂದ್ರಸ್ಥಾನವನ್ನು ಬಿಟ್ಟು ಹೋಗುವಂತಿಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
- ದೋಷಾರೋಪಣಾ ಪಟ್ಟಿ ಸಲ್ಲಿಕೆ: ಅಧಿಕಾರಿಯ ವಿರುದ್ಧ ನಿಯಮಾನುಸಾರ ಇಲಾಖಾ ವಿಚಾರಣೆ ನಡೆಸಲು ಕರಡು ದೋಷಾರೋಪಣಾ ಪಟ್ಟಿ (ಅನುಬಂಧ 1 ರಿಂದ 4) ಹಾಗೂ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಕಲಘಟಗಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜಿ.ಪಂ. ಸಿಇಒ ನಿರ್ದೇಶನ ನೀಡಿದ್ದಾರೆ.
ಅಧಿಕಾರಿಯ ಸೇವಾ ಪುಸ್ತಕದಲ್ಲಿ (Service Book) ಈ ಅಮಾನತು ಆದೇಶದ ಕುರಿತು ಸೂಕ್ತ ದಾಖಲೆಗಳನ್ನು ನಮೂದಿಸಲಾಗುವುದು ಎಂದು ಆದೇಶದ ಪ್ರತಿಯಲ್ಲಿ ತಿಳಿಸಲಾಗಿದೆ.
