ಧಾರವಾಡ: ಒಂಟಿ ಮನೆಗೆ ನುಗ್ಗಿದ “ಪಶ್ಚಿಮ ಬಂಗಾಳದವನ” ಕಟ್ಟಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು…!!!
ಧಾರವಾಡ: ನಗರದ ಕೆಎಂಎಫ್ (KMF) ಹತ್ತಿರವಿರುವ ಬಸವೇಶ್ವರ ಬಡಾವಣೆಯಲ್ಲಿ ಸಾರ್ವಜನಿಕರು ಕಳ್ಳತನದ ಶಂಕೆಯ ಮೇಲೆ ವ್ಯಕ್ತಿಯೊಬ್ಬನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಬಡಾವಣೆಯ ಮನೆಯೊಂದರಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯ ಮನೆಗೆ ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮವಾಗಿ ನುಗ್ಗಿದಾಗ ಈ ಘಟನೆ ಸಂಭವಿಸಿದೆ.
ಮನೆಗೆ ನುಗ್ಗಿದ ಅಪರಿಚಿತನನ್ನು ಪಶ್ಚಿಮ ಬಂಗಾಳ ಮೂಲದ ಪ್ರಭೋನ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಮಹಿಳೆಯ ಕಿರುಚಾಟ ಕೇಳಿ ತಕ್ಷಣ ಜಾಗೃತರಾದ ಸ್ಥಳೀಯರು, ಆರೋಪಿಯನ್ನು ಹಿಡಿದು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ತದನಂತರ ತಕ್ಷಣವೇ ಸ್ಥಳೀಯ ವಿದ್ಯಾಗಿರಿ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ವಿದ್ಯಾಗಿರಿ ಠಾಣೆಯ ಪೊಲೀಸರು, ಆರೋಪಿಯನ್ನು ಸಾರ್ವಜನಿಕರಿಂದ ಬಿಡಿಸಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.
ಕಳೆದ ಕೇವಲ ಒಂದು ವಾರದಲ್ಲಿ ಇದೇ ಬಸವೇಶ್ವರ ಬಡಾವಣೆಯಲ್ಲಿ ಸರಣಿಯಾಗಿ ಮೂರು ಕಳ್ಳತನ ಪ್ರಕರಣಗಳು ವರದಿಯಾಗಿದ್ದವು. ಈಗ ಮತ್ತೆ ಈ ಘಟನೆ ನಡೆದಿರುವುದರಿಂದ ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಹಾಗೂ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಬಡಾವಣೆಯಲ್ಲಿ ಪೊಲೀಸ್ ಗಸ್ತು ಹೆಚ್ಚಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
