ಪುಷ್ಕರಣಿ ಜಾಗವನ್ನ ಉತ್ಖನನ ಮಾಡಿಸುವ ಕುರಿತು “ಡಿಸಿಯವರು” ಒಪ್ಪಿಕೊಂಡಿದ್ದಾರೆ: ಮುಖಂಡ ಜಯತೀರ್ಥ ಕಟ್ಟಿ…!!!
ಪುರಾತನ ಭವಾನಿ ಶಂಕರ ನಾರಾಯಣ ದೇವಸ್ಥಾನದ ಪುಷ್ಕರಣಿ ರಕ್ಷಣೆಗೆ ಆಗ್ರಹ
ಧಾರವಾಡ: ಹುಬ್ಬಳ್ಳಿಯ ಆಸಾರ ಓಣಿಯಲ್ಲಿರುವ ಪುರಾತನ ಭವಾನಿ ಶಂಕರ ನಾರಾಯಣ ದೇವಸ್ಥಾನದ ಪುಷ್ಕರಣಿಯನ್ನು ಸಂರಕ್ಷಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರಿಗೆ ಮನವಿ ಸಲ್ಲಿಸಲಾಯಿತು.
ಪುರಾತನ ಭವಾನಿ ಶಂಕರ ನಾರಾಯಣ ದೇವಸ್ಥಾನ ಪುಷ್ಕರಣಿ ಸಂರಕ್ಷಣಾ ಸಮಿತಿ ಹಾಗೂ ಹಳೆ ಹುಬ್ಬಳ್ಳಿ ಸಂಘಟನೆಗಳ ಸದಸ್ಯರು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಪುರಾತತ್ವ ಇಲಾಖೆಯ ಅನುಮತಿ ಪಡೆಯದೇ ಪುಷ್ಕರಣಿ ಪ್ರದೇಶದಲ್ಲಿ ರಸ್ತೆ ಕಾಮಗಾರಿ ಕೈಗೊಂಡಿರುವುದು ಖಂಡನೀಯ. ಪುರಾತನ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಈ ಪುಷ್ಕರಣಿಯನ್ನು ಕೂಡಲೇ ಸಂರಕ್ಷಿಸಬೇಕು. ಜೊತೆಗೆ ಸ್ಥಳದಲ್ಲಿ ವೈಜ್ಞಾನಿಕವಾಗಿ ಉತ್ಖನನ ನಡೆಸಿ, ಪುಷ್ಕರಣಿಯ ಐತಿಹಾಸಿಕ ಹಿನ್ನೆಲೆ ಹಾಗೂ ಪುರಾತನ ಕುರುಹುಗಳನ್ನು ಸಂರಕ್ಷಿಸಬೇಕು ಎಂದು ಸದಸ್ಯರು ಒತ್ತಾಯಿಸಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ಪುರಾತತ್ವ ಇಲಾಖೆ ಪರಸ್ಪರ ಸಮನ್ವಯ ಸಾಧಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಈ ಪ್ರದೇಶವು ಧಾರ್ಮಿಕವಾಗಿ ಪವಿತ್ರ ಕ್ಷೇತ್ರವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಆದ್ಯತೆ ಮೇರೆಗೆ ಕ್ರಮ ಕೈಗೊಂಡು ಪುಷ್ಕರಣಿಯ ಸಂರಕ್ಷಣೆಗೆ ಮುಂದಾಗಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
