Karnataka Voice

Latest Kannada News

ಧಾರವಾಡ ಜಿಲ್ಲೆಯಾಧ್ಯಂತ ಗಣೇಶ ಹಬ್ಬದ ಹಿನ್ನೆಲೆ: ಡಿಜೆ, ಹೆಚ್ಚಿನ ಡೆಸಿಬೆಲ್ ಸಾಧನ ನಿಷೇಧ- ಜಿಲ್ಲಾಧಿಕಾರಿ ಆರ್.ಸ್ನೇಹಲ್ ಆದೇಶ…

Spread the love

ಗಣೇಶ ಹಬ್ಬದ ವೇಳೆ ಡಿಜೆ, ಹೆಚ್ಚಿನ ಡೆಸಿಬೆಲ್ ಶಬ್ದ ಸಾಧನ ಬಳಕೆ ನಿಷೇಧ. ನಿಯಮ ಉಲ್ಲಂಘಿಸಿದರೆ ಡಿಜೆ ಜಪ್ತಿ, ಕಾರ್ಯಕ್ರಮ ಸ್ಥಗಿತ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಧಾರವಾಡ: ಗಣೇಶ ಹಬ್ಬ, ಮೆರವಣಿಗೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಹೆಚ್ಚಿನ ಡೆಸಿಬೆಲ್ ಶಬ್ದ ಉಂಟುಮಾಡುವ ಡಿಜೆ ವ್ಯವಸ್ಥೆ, ಲೌಡ್‌ಸ್ಪೀಕರ್‌ಗಳು ಹಾಗೂ ಇತರೆ ಶಬ್ದವರ್ಧಕ ಸಾಧನಗಳ ಅತಿಯಾದ ಬಳಕೆಯಿಂದ ಸಾರ್ವಜನಿಕ ಶಾಂತಿ, ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಧಾರವಾಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ.

ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು ನಿಯಮಗಳು), 2000 ಹಾಗೂ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್), 2023ರ ಕಲಂ 163ರಡಿ ಜಿಲ್ಲಾ ದಂಡಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.

ಆದೇಶದನ್ವಯ ಗಣೇಶ ಹಬ್ಬದ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಡಿಜೆ ವ್ಯವಸ್ಥೆಗಳು, ಬೇಸ್ ಬೂಸ್ಟರ್‌ಗಳು, ಮೊಬೈಲ್ ಡಿಜೆ ವಾಹನಗಳು ಹಾಗೂ 75 ಡೆಸಿಬೆಲ್‌ಗಿಂತ ಹೆಚ್ಚಿನ ಶಬ್ದ ಉಂಟುಮಾಡುವ ಶಬ್ದವರ್ಧಕ ಸಾಧನಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ವಸತಿ ಪ್ರದೇಶಗಳು, ಸೈಲೆಂಟ್ ಝೋನ್‌ಗಳು, ಆಸ್ಪತ್ರೆಗಳು, ಶಾಲೆಗಳು, ನ್ಯಾಯಾಲಯಗಳು ಹಾಗೂ ಧಾರ್ಮಿಕ ಸ್ಥಳಗಳಿಂದ 100 ಮೀಟರ್ ವ್ಯಾಪ್ತಿಯ ಪ್ರದೇಶಗಳು, ಸಂಚಾರ ದಟ್ಟಣೆ ಇರುವ ಪ್ರದೇಶಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಶಬ್ದ ಉಂಟುಮಾಡುವ ಸಾಧನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲಾಗಿದೆ.

ಅಲ್ಲದೆ, ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ ಡಿಜೆ ಹಾಗೂ ಹೆಚ್ಚಿನ ಶಬ್ದ ಉಂಟುಮಾಡುವ ಸಾಧನಗಳ ಬಳಕೆಯನ್ನು ನಿಷೇಧಿಸಲಾಗಿದೆ.

ನಿಯಮ ಉಲ್ಲಂಘನೆಯಾದಲ್ಲಿ ಸಂಬಂಧಿಸಿದ ಪೊಲೀಸ್ ಠಾಣೆಯ ಅಧಿಕಾರಿಗಳು ಮೆರವಣಿಗೆ ಅಥವಾ ಕಾರ್ಯಕ್ರಮವನ್ನು ತಕ್ಷಣವೇ ಸ್ಥಗಿತಗೊಳಿಸುವುದು, ಡಿಜೆ ಹಾಗೂ ಶಬ್ದವರ್ಧಕ ಉಪಕರಣಗಳನ್ನು ಜಪ್ತಿ ಮಾಡುವುದು, ಅಗತ್ಯವಿದ್ದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದು, ಗುಂಪನ್ನು ಚದುರಿಸುವುದು ಹಾಗೂ ಸಂಬಂಧಿಸಿದವರ ವಿರುದ್ಧ ಪ್ರಕರಣ ದಾಖಲಿಸುವ ಅಧಿಕಾರ ಹೊಂದಿರುತ್ತಾರೆ. ಜೊತೆಗೆ, ಅಗತ್ಯವಿದ್ದಲ್ಲಿ ಮುಂದಿನ ಅನುಮತಿಗಳನ್ನು ರದ್ದುಪಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಾರ್ವಜನಿಕ ಕಾರ್ಯಕ್ರಮ, ಮೆರವಣಿಗೆ ಅಥವಾ ಆಚರಣೆ ಆಯೋಜಿಸುವವರು ಶಬ್ದ ವ್ಯವಸ್ಥೆ ಬಳಸುವುದು ಅಗತ್ಯವಿದ್ದಲ್ಲಿ ಪೂರ್ವ ಲಿಖಿತ ಅನುಮತಿ ಪಡೆಯುವುದು ಕಡ್ಡಾಯ. ಪೊಲೀಸ್ ಇಲಾಖೆಯಿಂದ ಷರತ್ತುಬದ್ಧವಾಗಿ ಅನುಮತಿ ಪಡೆದ ನಂತರವೇ ನಿಗದಿತ ಮಿತಿಯಲ್ಲಿ ಶಬ್ದವರ್ಧಕ ಸಾಧನಗಳನ್ನು ಬಳಸಬೇಕು. ಈ ಸಂಬಂಧ ಆಯೋಜಕರು ಶಬ್ದ ನಿಯಮಗಳನ್ನು ಪಾಲಿಸುವ ಕುರಿತು ಲಿಖಿತ ಮುಚ್ಚಳಿಕೆ ಪತ್ರ ನೀಡಬೇಕು.

ಆದೇಶ ಉಲ್ಲಂಘನೆಯಾದಲ್ಲಿ ಆಯೋಜಕರನ್ನೇ ವೈಯಕ್ತಿಕವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಹಾಗೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಎಚ್ಚರಿಸಿದ್ದಾರೆ.

ಈ ಆದೇಶವನ್ನು ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತರು ಹಾಗೂ ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕರು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed