ಧಾರವಾಡ: 50ಲಕ್ಷ ರೂಪಾಯಿ, 1ಎಕರೆ ಭೂಮಿಗೆ ಬೇಡಿಕೆಯಿಟ್ಟಿದ್ದ “ಮಹಾನುಭಾವ ತಹಶೀಲ್ದಾರ” ಸಚ್ಚಿದಾನಂದ ಕುಚನೂರು ಲೋಕಾ ಬಲೆಗೆ…
₹50 ಲಕ್ಷ ಲಂಚ ಸ್ವೀಕರಿಸುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!
ಧಾರವಾಡದ ಕೆಸಿಡಿ ಮೈದಾನದಲ್ಲಿ ಕಾರ್ಯಾಚರಣೆ — ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ವಶಕ್ಕೆ
ಧಾರವಾಡದಲ್ಲಿ ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮಂಜುನಾಥ ಅರಳಿಕಟ್ಟಿ ಎಂಬುವವರ ಜಮೀನು ಧಾರವಾಡ ತಾಲೂಕಿನ ಯರಿಕೊಪ್ಪದ ಬಳಿಯಿದ್ದು, ಅದರಲ್ಲಿನ ‘ಬ’ ಖರಾಬು ಬದಲಾವಣೆ ಮಾಡಿಕೊಡುವುದಕ್ಕಾಗಿ ತಹಶೀಲ್ದಾರ್ ₹50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇದರೊಂದಿಗೆ ಒಂದು ಎಕರೆ ಜಮೀನನ್ನೂ ಕೇಳಿದ್ದರು ಎಂಬ ಆರೋಪ ಕೇಳಿಬಂದಿದೆ.
ದೂರು ಆಧರಿಸಿ ಧಾರವಾಡದ ಕೆಸಿಡಿ ಮೈದಾನದಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಲಂಚ ಸ್ವೀಕರಿಸುವ ವೇಳೆ ತಹಶೀಲ್ದಾರ್ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಲೋಕಾಯುಕ್ತ ಎಸ್ಪಿ ಸಿದ್ಲಿಂಗಪ್ಪ ಕರಣೇಶಗೌಡ ನೇತೃತ್ವದಲ್ಲಿ ದಾಳಿ ನಡೆದಿದೆ.
ಪ್ರಕರಣದ ಕುರಿತು ಲೋಕಾಯುಕ್ತ ಅಧಿಕಾರಿಗಳಿಂದ ಹೆಚ್ಚಿನ ತನಿಖೆ ಮುಂದುವರಿದಿದೆ.
