ಜನೌಷಧದಿಂದ ಜನರಿಗೆ 500 ಕೋಟಿ ಉಳಿತಾಯ: ಗುರಿಮೀರಿದ ವಹಿವಾಟು

ಬೆಂಗಳೂರು: ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಔಷಧಿಗಳನ್ನು ಪೂರೈಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯಿಂದಾಗಿ (ಪಿಎಂಬಿಜೆಪಿ) ಕರ್ನಾಟಕ ರಾಜ್ಯವೊಂದರಲ್ಲೇ ಜನರಿಗೆ ಈ ವರ್ಷ ಕನಿಷ್ಠವೆಂದರೂ 500 ಕೋಟಿ ರೂಪಾಯಿ ಉಳಿತಾಯವಾಗುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸದಾನಂದ ಗೌಡ ಹೇಳಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಪಿಎಂ ಬಿಜೆಪಿ ಯೋಜನೆಯಡಿ ಆರಂಭವಾಗಿರುವ ಜನೌಷಧಿ ಕೇಂದ್ರಗಳ ಕಾರ್ಯನಿರ್ವಹಣೆಯ ಪರಿಶೀಲನಾ ಸಭೆ ನಡೆಸಿದ ಸಚಿವರು ನಂತರ ಮಾಧ್ಯಮ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದರು.
ಆರ್ಥಿಕ ದುರ್ಬಲರಿಗಾಗಿಯೇ ಆರಂಭಿಸಲಾಗಿರುವ ಜನೌಷಧಿಗಳು ದಿನದಿಂದ ದಿನಕ್ಕೆ ಜನಪ್ರಿಯವಾಗುತ್ತಿವೆ. ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜನೌಷಧಿ ಮಾರಾಟ ಶೇಕಡಾ 73ರಷ್ಟು ವೃದ್ಧಿಯಾಗಿದೆ. ರಾಜ್ಯದಲ್ಲಿ 2020-21ರ ಹಣಕಾಸು ವರ್ಷದಲ್ಲಿ ₹125 ಕೋಟಿ ಮೌಲ್ಯದ ಜನೌಷಧಿ ಮಾರಾಟದ ಗುರಿ ಹೊಂದಲಾಗಿದ್ದು ಕಳೆದ ಆರು ತಿಂಗಳಲ್ಲಿ ₹65 ಕೋಟಿ ವಹಿವಾಟು ನಡೆಸಲಾಗಿದೆ. ಕೊರೋನಾದಂತಹ ಸಂಕಷ್ಟದ ಸಮಯದಲ್ಲಿಯೂ ಜನೌಷಧಿ ಕೇಂದ್ರಗಳು ಗುರಿಮೀರಿ ವಹಿವಾಟು ನಡೆಸಿವೆ ಎಂದರು.
ಖಾಸಗಿ ಔಷಧ ಅಂಗಡಿಗಳು ಮಾರಾಟ ಮಾಡುವ ಔಷಧಗಳ ಬೆಲೆಗೆ ಹೋಲಿಕೆ ಮಾಡಿದರೆ ನಮ್ಮಲ್ಲಿ ಸಿಗುವ ಅದೇ ಔಷಧಗಳ ಬೆಲೆ ಸರಾಸರಿ ನಾಲ್ಕರಿಂದ ಐದು ಪಟ್ಟು ಕಡಿಮೆ. ಕರ್ನಾಟಕದಲ್ಲಿ ವಾರ್ಷಿಕವಾಗಿ ಮಾರಾಟವಾಗುವ ಜನೌಷಧಿ ಮೌಲ್ಯ ಅಂದಾಜು 125 ಕೋಟಿ ರೂಪಾಯಿ. ನಮ್ಮ ಜನೌಷಧಿ ಅಂಗಡಿಗಳು ಇಲ್ಲವಾಗಿದ್ದರೆ ಜನರು ಸಂಪೂರ್ಣವಾಗಿ ಖಾಸಗಿ ಔಷಧಿ ಅಂಗಡಿಗಳ ಮೇಲೆ ಅವಲಂಬಿತವಾಗಿರಬೇಕಾಗುತ್ತಿತ್ತು. ಇಷ್ಟೇ ಮೌಲ್ಯದ (125 ಕೋಟಿ ರೂ.) ಇದೇ ಔಷಧಗಳನ್ನು ಖಾಸಗಿ ಔಷಧ ಅಂಗಡಿಗಳಲ್ಲಿ ಕೊಂಡುಕೊಳ್ಳಬೇಕಾದರೆ 600ರಿಂದ 700 ಕೋಟಿ ರೂ. ವ್ಯಯಿಸಬೇಕಿತ್ತು ಎಂದು ವಿವರಿಸಿದರು.
ಹೀಗಾಗಿ ರಾಜ್ಯದ ಜನರಿಗೆ ಜನೌಷಧಿ ಕೇಂದ್ರಗಳಿಂದ ಈ ವರ್ಷ ಏನಿಲ್ಲವೆಂದರೂ 500 ಕೋಟಿ ರೂ. ಉಳಿತಾಯವಾಗುತ್ತಿದೆ. ಜನೌಷಧ ಅಂಗಡಿಗಳಲ್ಲಿ ಔಷಧಗಳ ಬೆಲೆ ಕಡಿಮೆ ಎಂದಾಕ್ಷಣ ಗುಣಮಟ್ಟದಲ್ಲೇನೂ ಕಡಿಮೆಯಿಲ್ಲ. ಅಂತಾರಾಷ್ಟ್ರೀಯ ಮಾನದಂಡಕ್ಕನುಗುಣವಾಗಿ ಅವುಗಳ ಗುಣಮಟ್ಟವನ್ನು ಪರಿಶೀಲಿಸಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು.