ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ‘ಸಂಚಾರಿ ವಿಜಯ’ ಇನ್ನಿಲ್ಲ…!

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು, ಬೆಂಗಳೂರು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೈಕ್ ಅಪಘಾತದಲ್ಲಿ ಆಸ್ಪತ್ರೆ ಸೇರಿದ್ದ ವಿಜಯ್ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದ ವಿಜಯ (37) ಕೊನೆಯುಸಿರೆಳೆದಿದ್ದಾರೆ.
ಶನಿವಾರ ರಾತ್ರಿ ಗೆಳೆಯನ ಮನೆಯಲ್ಲಿ ಊಟ ಮಾಡಿಕೊಂಡು ಬೈಕಿನಲ್ಲಿ ನಟ ಹಿಂದಿರುಗುತ್ತಿದ್ದರು. ಈ ವೇಳೆ ಗೆಳೆಯ ನವೀನ್ ಬೈಕ್ ಓಡಿಸುತ್ತಿದ್ದು, ವಿಜಯ್ ಹಿಂಬದಿಯಲ್ಲಿ ಕುಳಿತಿದ್ದರು. ಜೆಪಿನಗರದ 7ನೇ ಹಂತದಲ್ಲಿ ಬೈಕ್ ಸ್ಕಿಡ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಅಪಘಾತದ ರಭಸಕ್ಕೆ ನಟ ಸಂಚಾರಿ ವಿಜಯ್ ಗೆ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ನಂತರ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಸಂಚಾರಿ ವಿಜಯ್ ಗೆ ಚಿಕಿತ್ಸೆ ಕೊಡಲಾಗುತ್ತಿತ್ತು, ಆದ್ರೆ ಚಿಕಿತ್ಸೆ ಫಲಿಸದೇ ಸಂಚಾರಿ ವಿಜಯ್ ಇಂದು ಸಾವಿಗೀಡಾಗಿದ್ದಾರೆ.
2011ರಲ್ಲಿ ತೆರೆಗೆ ಬಂದ ‘ರಂಗಪ್ಪ ಹೋಗ್ಬಿಟ್ನಾ’ ಸಿನಿಮಾ ಮೂಲಕ ಸಂಚಾರಿ ವಿಜಯ್ ಚಿತ್ರರಂಗಕ್ಕೆ ಕಾಲಿಟ್ಟರು. 2015ರಲ್ಲಿ ತೆರೆಗೆ ಬಂದ ‘ನಾನು ಅವನಲ್ಲ.. ಅವಳು’ ಸಿನಿಮಾ ಅವರ ಖ್ಯಾತಿಯನ್ನು ದುಪ್ಪಟ್ಟು ಮಾಡಿತ್ತು. ಈ ಸಿನಿಮಾದಲ್ಲಿ ಅವರ ನಟನೆಗೆ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿಗಳು ಸಿಕ್ಕಿವೆ. ಇದಾದ ನಂತರದಲ್ಲಿ ಅವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿದರು. ಸದ್ಯ, ಎರಡು ಕನ್ನಡ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದರು. ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟ ದಲ್ಲಿರುವ ಅನೇಕರಿಗೆ ಸಹಾಯ ಮಾಡುತ್ತಿದ್ದರು.