KPCC ಅಧ್ಯಕ್ಷೆ “ಬಿಕೆಹ” ವಿರುದ್ಧ ಹರಿಹಾಯ್ದ ರಾಜ್ಯಸಭಾ ಸದಸ್ಯ ‘ಮಾ.ನಾಗರಾಜ್’
ಉಮರ್ ಖಾಲಿದ್ ಪರ ಕಾಂಗ್ರೆಸ್ ನಿಲುವಿಗೆ ಬಿಜೆಪಿ ಖಂಡನೆ
ಹುಬ್ಬಳ್ಳಿ: ದೇಶದ್ರೋಹದ ಆರೋಪ ಎದುರಿಸುತ್ತಿರುವ ಉಮರ್ ಖಾಲಿದ್ ಪರವಾಗಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಪ್ರೊ. ಎಂ. ನಾಗರಾಜ್ ತೀವ್ರವಾಗಿ ಖಂಡಿಸಿದ್ದಾರೆ.
ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಎಬಿವಿಪಿ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹರಿಪ್ರಸಾದ್ ಅವರು ನೀಡಿರುವ ಹೇಳಿಕೆ ಕಾಂಗ್ರೆಸ್ ಪಕ್ಷದ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಗಳು ಹಾಗೂ 2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದ ಪಿತೂರಿ ಆರೋಪದ ಹಿನ್ನೆಲೆಯಲ್ಲಿ ಉಮರ್ ಖಾಲಿದ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಅವರ ವಿರುದ್ಧ ಯುಎಪಿಎ ಸೇರಿದಂತೆ ವಿವಿಧ ಆರೋಪಗಳಿದ್ದು, ಹಲವು ವರ್ಷಗಳಿಂದ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ನಾಗರಾಜ್ ತಿಳಿಸಿದ್ದಾರೆ.
ದೇಶದ್ರೋಹದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಕಾಂಗ್ರೆಸ್ ರಾಜ್ಯಾಧ್ಯಕ್ಷರು ಮಾತನಾಡಿರುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದ್ದು, ಉಮರ್ ಖಾಲಿದ್ ಪರವಾಗಿ ಮಾತನಾಡುವ ಮೂಲಕ ಮತ್ತಷ್ಟು ಓಲೈಕೆಗೆ ಮುಂದಾಗಿದೆ ಎಂದು ಅವರು ಟೀಕಿಸಿದ್ದಾರೆ.
ರಾಷ್ಟ್ರ ಪುನರ್ನಿರ್ಮಾಣದ ಕಾರ್ಯದಲ್ಲಿ ಹಲವು ದಶಕಗಳಿಂದ ತೊಡಗಿರುವ ಎಬಿವಿಪಿ ಸಂಘಟನೆಯ ಕುರಿತು ಮಾತನಾಡುವ ನೈತಿಕತೆ ಬಿ.ಕೆ.ಹರಿಪ್ರಸಾದ್ ಅವರಿಗೆ ಇಲ್ಲ. ಕೂಡಲೇ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಪ್ರೊ. ಎಂ. ನಾಗರಾಜ್ ಆಗ್ರಹಿಸಿದ್ದಾರೆ.
