Karnataka Voice

Latest Kannada News

ನವಲಗುಂದ ತಾಲೂಕನ್ನ ಬರಪೀಡಿತ ಎಂದು ಘೋಷಿಸುವಂತೆ ಸರಕಾರವನ್ನ ಒತ್ತಾಯಿಸಿದ ಕಾಂಗ್ರೆಸ್ ನಾಯಕ ವಿನೋದ ಅಸೂಟಿ…

Spread the love

ಧಾರವಾಡ: 2025–26ನೇ ಸಾಲಿನಲ್ಲಿ ಉಂಟಾಗಿರುವ ಮಳೆ ಅನಿಶ್ಚಿತತೆ, ಕೃಷಿ ಸಂಕಷ್ಟ ಹಾಗೂ ಬರ ಪರಿಸ್ಥಿತಿಯನ್ನು ಪರಿಗಣಿಸಿ ನವಲಗುಂದ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಕಾಂಗ್ರೆಸ್ ಮುಖಂಡ ವಿನೋದ ಅಸೂಟಿ ಅವರು ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರಿಗೆ ಮನವಿ ಸಲ್ಲಿಸಿದ್ದಾರೆ.

ನವಲಗುಂದ ತಾಲೂಕು ಕೃಷಿ ಪ್ರಧಾನ ಹಾಗೂ ಮಳೆ ಆಧಾರಿತ ಪ್ರದೇಶವಾಗಿದ್ದು, ಪ್ರಸಕ್ತ ಸಾಲಿನಲ್ಲಿ ಹವಾಮಾನ ವೈಪರೀತ್ಯ ಮತ್ತು ಮಳೆಯ ಅನಿಶ್ಚಿತತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಸರಾಸರಿ ವಾರ್ಷಿಕ ಮಳೆ ಸುಮಾರು 78.7 ಸೆಂ.ಮೀ. ಇದ್ದರೂ, ನವಲಗುಂದ ಸೇರಿದಂತೆ ಕೆಲವು ತಾಲೂಕುಗಳಲ್ಲಿ ಮಳೆ ಪ್ರಮಾಣ ತುಲನಾತ್ಮಕವಾಗಿ ಕಡಿಮೆಯಾಗಿದ್ದು, ಮಳೆ ಕೊರತೆಯಿಂದ ಬಿತ್ತನೆ, ಬೆಳೆ ಬೆಳವಣಿಗೆ ಹಾಗೂ ರೈತರ ಆದಾಯದ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ ಎಂದು ತಿಳಿಸಲಾಗಿದೆ.

2025ರ ಆಗಸ್ಟ್‌ನಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪದಿಂದ ಉಂಟಾದ ಬೆಳೆಹಾನಿಗೆ ಸಂಬಂಧಿಸಿದಂತೆ ನವಲಗುಂದ ತಾಲೂಕಿನಲ್ಲಿ 18,433 ರೈತ ಫಲಾನುಭವಿಗಳನ್ನು ಗುರುತಿಸಿ ಸುಮಾರು ₹18.74 ಕೋಟಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಇದು ತಾಲೂಕಿನ ಕೃಷಿ ಕ್ಷೇತ್ರವು ಹವಾಮಾನ ವೈಪರೀತ್ಯದಿಂದ ದೊಡ್ಡ ಪ್ರಮಾಣದಲ್ಲಿ ಹಾನಿಗೊಳಗಾಗಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.

ಇದೇ ವೇಳೆ, 2023ರ ಬರ ಪರಿಸ್ಥಿತಿಯಲ್ಲೂ ನವಲಗುಂದ ತಾಲೂಕಿನಲ್ಲಿ 28,725 ಹೆಕ್ಟೇರ್ ಪ್ರದೇಶದಲ್ಲಿ ಶೇ.50ಕ್ಕಿಂತ ಹೆಚ್ಚು ಬೆಳೆ ನಷ್ಟ ದಾಖಲಾಗಿದ್ದು, ಸುಮಾರು ₹39.68 ಕೋಟಿ ಸಹಾಯಧನ ಕೋರಲಾಗಿತ್ತು. ಈ ಹಿನ್ನೆಲೆ ನವಲಗುಂದ ತಾಲೂಕು ಬರ ಪರಿಸ್ಥಿತಿಗೆ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದೆ ಎಂದು ವಿನೋದ ಅಸೂಟಿ ಅವರು ಗಮನ ಸೆಳೆದಿದ್ದಾರೆ.

ಪ್ರಸಕ್ತ ಪರಿಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿ, ಮಳೆ ಪ್ರಮಾಣ, ಬೆಳೆ ನಷ್ಟ, ಬಿತ್ತನೆ ಪ್ರದೇಶ, ಕೆರೆ-ಕೊಳವೆಬಾವಿಗಳ ನೀರಿನ ಮಟ್ಟ ಹಾಗೂ ಕುಡಿಯುವ ನೀರಿನ ಸ್ಥಿತಿಗತಿ ಕುರಿತು ವೈಜ್ಞಾನಿಕ ಜಂಟಿ ಸಮೀಕ್ಷೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಮೀಕ್ಷಾ ವರದಿಯ ಆಧಾರದ ಮೇಲೆ ನವಲಗುಂದ ತಾಲೂಕನ್ನು ತಕ್ಷಣ ಬರಪೀಡಿತ ತಾಲೂಕು ಎಂದು ಘೋಷಿಸಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಎಸ್‌ಡಿಆರ್‌ಎಫ್ ಹಾಗೂ ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ತ್ವರಿತ ಪರಿಹಾರ ನೀಡಬೇಕು. ಕೃಷಿ ಸಾಲ ಮರುಪಾವತಿಗೆ ಸಡಿಲಿಕೆ ಹಾಗೂ ಪುನರ್‌ರಚನೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮೇವು ಬ್ಯಾಂಕ್ ಮತ್ತು ಗೋಶಾಲೆ ವ್ಯವಸ್ಥೆ ಕಲ್ಪಿಸುವುದು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಡೆಗಟ್ಟಲು ಪರ್ಯಾಯ ವ್ಯವಸ್ಥೆ ಮಾಡುವುದು ಹಾಗೂ ಜಿರಾಮ್‌ಜಿ ಯೋಜನೆಯಡಿ ಹೆಚ್ಚಿನ ಕಾಮಗಾರಿಗಳನ್ನು ಆರಂಭಿಸಿ ಕೃಷಿ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಲಾಗಿದೆ.
ನವಲಗುಂದ ತಾಲೂಕಿನ ರೈತರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ತಕ್ಷಣ ಅಗತ್ಯ ಕ್ರಮ ಕೈಗೊಂಡು, ತಾಲೂಕನ್ನು ಬರಪೀಡಿತ ಎಂದು ಘೋಷಿಸುವ ಜೊತೆಗೆ ವಿಶೇಷ ಪರಿಹಾರ ಪ್ಯಾಕೇಜ್ ಪ್ರಕಟಿಸಬೇಕು ಎಂದು ಕಾಂಗ್ರೆಸ್ ಮುಖಂಡ ವಿನೋದ ಅಸೂಟಿ ಅವರು ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರಿಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.


Spread the love

Leave a Reply

Your email address will not be published. Required fields are marked *