ಕಿಮ್ಸ್- ಕ್ವಾರಂಟೈನ್ ಕೇಂದ್ರ- ಕೋವಿಡ್ ಕೇರ್ ಸೆಂಟರುಗಳಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಭೇಟಿ
1 min readಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆವರಣದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿರುವ ನಿಗದಿತ ಕೋವಿಡ್ ಆಸ್ಪತ್ರೆ, ರಾಜನಗರದ ಬಿಸಿಎಂ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿರುವ ಕ್ವಾರಂಟೈನ್ ಕೇಂದ್ರ ಹಾಗೂ ಗೋಕುಲ ರಸ್ತೆ ಸಂಜೀವಿನಿ ಆಯುರ್ವೇದ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಿಮ್ಸ್ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಿಮ್ಸ್ ವೈದ್ಯರು ಹಗಲಿರುಳು ಶ್ರಮಿಸುತ್ತಿದ್ದಾರೆ. ಪ್ರತಿದಿನ ಸುಮಾರು 350 ಜನರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಕಿಮ್ಸ್ ನಲ್ಲಿ ಕೋವಿಡ್ ಗೆ ಉತ್ತಮ ಚಿಕಿತ್ಸೆ ಲಭ್ಯವಾಗುತ್ತಿದೆ.ಜೊತೆಗೆ ಇತರ ಸಾಮಾನ್ಯ ಖಾಯಿಲೆಗಳ ಚಿಕಿತ್ಸೆಯೂ ಸಮರ್ಪಕವಾಗಿ ನಡೆಯುತ್ತಿದೆ. ಪ್ರಸ್ತುತ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರುಗಳಲ್ಲಿ ಸಾಕಷ್ಟು ಹಾಸಿಗೆಗಳು ಲಭ್ಯ ಇವೆ. ಖಾಸಗಿ ಆಸ್ಪತ್ರೆಗಳ ಸೇವೆಯನ್ನೂ ಕೂಡ ಪಡೆಯಲಾಗುವುದು. ಕೋವಿಡ್ ನಿಯಂತ್ರಣ ಜೊತೆಗೆ ಅಭಿವೃದ್ಧಿ ಕಾರ್ಯ,ವಾಣಿಜ್ಯ ವಹಿವಾಟು, ಕೈಗಾರಿಕಾ ಉತ್ಪಾದನಾ ಚಟುವಟಿಕೆಗಳಿಗೂ ಆದ್ಯತೆ ನೀಡಲಾಗುತ್ತದೆ ಎಂದರು.
ರಾಷ್ಟ್ರೀಯ ವೈದ್ಯರ ದಿನದ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಐಎಂಎ ಪದಾಧಿಕಾರಿಗಳು ,ಕಿಮ್ಸ್ ವೈದ್ಯರು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳನ್ನು ಸನ್ಮಾನಿಸಿ, ಗೌರವಿಸಿದರು.
ರಾಜನಗರದ ಬಿಸಿಎಂ ಬಾಲಕಿಯರ ವಿದ್ಯಾರ್ಥಿ ನಿಲಯದ ಕ್ವಾರಂಟೈನ್ ಕೇಂದ್ರ ಹಾಗೂ ಸಂಜೀವಿನಿ ಆಯುರ್ವೇದ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಸೌಲಭ್ಯಗಳನ್ನು ಪರಿಶೀಲಿಸಿದರು.
ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ, ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್, ಕಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ್ ಚವ್ಹಾಣ, ಡಾ.ರಾಜಶೇಖರ ದ್ಯಾಬೇರಿ, ಡಾ.ಈಶ್ವರ ಹಸಬಿ, ಡಾ.ಎಸ್.ವೈ.ಮುಲ್ಕಿಪಾಟೀಲ, ಡಾ.ಲಕ್ಷ್ಮೀಕಾಂತ, ಕಿಮ್ಸ್ ಮುಖ್ಯ ಆಡಳಿತಾಧಿಕಾರಿ ರಾಜಶ್ರೀ ಜೈನಾಪುರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಹುಬ್ಬಳ್ಳಿ ಶಹರ ತಹಶೀಲ್ದಾರ ಶಶಿಧರ ಮಾಡ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ, ಡಾ.ಶಶಿ ಪಾಟೀಲ ಮತ್ತಿತರರು ಇದ್ದರು.