ಧಾರವಾಡದ ಪೊಲೀಸ್ ಠಾಣೆಗೆ ಹೋಗಿ ನೇರವಾಗಿ ಎಚ್ಚರಿಕೆ ಕೊಟ್ಟ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್…!!!
ಧಾರವಾಡ: ಧರ್ಮಸ್ಥಳ ಭಕ್ತ ಬಳಗ, ಹಿಂದೂ ಸಂಘಟನೆ, ಎಬಿವಿಪಿ ಹಾಗೂ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿರುವ ಕ್ರಮವನ್ನು ಖಂಡಿಸಿ ಶಾಸಕ ಅರವಿಂದ ಬೆಲ್ಲದ್ ಅವರು ಧಾರವಾಡ ಶಹರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಕಚೇರಿ ಎದುರು ನಡೆದ ಗಲಾಟೆ ಹಾಗೂ ಹೈಡ್ರಾಮಾ ವೇಳೆ ಹಲ್ಲೆಗೊಳಗಾದ ಎಬಿವಿಪಿ ಮತ್ತು ಹಿಂದೂ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಆರೋಗ್ಯ ಹಾಗೂ ಘಟನೆಯ ಕುರಿತು ಮಾಹಿತಿ ಪಡೆದರು.
ಈ ವೇಳೆ ಪೊಲೀಸರ ಕ್ರಮವನ್ನು ಪ್ರಶ್ನಿಸಿದ ಶಾಸಕ ಅರವಿಂದ ಬೆಲ್ಲದ್, “ಆರ್ಎಸ್ಎಸ್ ವಿರುದ್ಧ ಧಿಕ್ಕಾರ ಕೂಗಿದವರನ್ನು ಪೊಲೀಸರು ಏಕೆ ಬಂಧಿಸಿಲ್ಲ? ಬಿಜೆಪಿ ಹಾಗೂ ಎಬಿವಿಪಿ ಕಾರ್ಯಕರ್ತರನ್ನು ಮಾತ್ರ ಗುರಿಯಾಗಿಸಿಕೊಂಡು ಬಂಧಿಸಲಾಗಿದೆ. ಘಟನೆಗೆ ಕಾರಣರಾದವರ ವಿರುದ್ಧ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.
ರಸ್ತೆಗೆ ಬಂದು ಆರ್ಎಸ್ಎಸ್ ವಿರುದ್ಧ ಘೋಷಣೆ ಕೂಗುತ್ತ ರಸ್ತೆ ತಡೆ ನಡೆಸಿದ ಸಮುದಾಯ ಸಂಘಟನೆಯವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಅವರು, ಕಾನೂನು ಎಲ್ಲರಿಗೂ ಒಂದೇ ರೀತಿಯಾಗಿ ಅನ್ವಯವಾಗಬೇಕು ಎಂದು ಹೇಳಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ನಟ ಪ್ರಕಾಶ್ ರಾಜ್ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಕೆಲವರು ಆರ್ಎಸ್ಎಸ್ ವಿರುದ್ಧ ಘೋಷಣೆ ಕೂಗಿದ್ದು, ಅದನ್ನು ಪ್ರಶ್ನಿಸಿದ ನಮ್ಮ ಕಾರ್ಯಕರ್ತರ ಮೇಲೆಯೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ದೂರಿದರು.
“ಗಲಾಟೆ ಮಾಡಿದವರು ಯಾರೇ ಆಗಿರಲಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ತಿಳಿಸಿದ್ದೇನೆ. ಆದರೆ ಸರ್ಕಾರಕ್ಕೆ ಎಷ್ಟೇ ಹೇಳಿದರೂ ನಮ್ಮ ಮಾತನ್ನು ಕೇಳುತ್ತಿಲ್ಲ” ಎಂದು ಶಾಸಕ ಬೆಲ್ಲದ್ ಅಸಮಾಧಾನ ವ್ಯಕ್ತಪಡಿಸಿದರು.
ಎಬಿವಿಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆಯ ವಿಡಿಯೋ ದೃಶ್ಯಗಳನ್ನು ಮಾನವ ಹಕ್ಕು ಆಯೋಗಕ್ಕೆ ಸಲ್ಲಿಸಲಾಗುವುದು. ಘಟನೆಯ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
