Karnataka Voice

Latest Kannada News

ಸತ್ತೂರ ನಿವಾಸಿಗಳಾಗಿದ್ದ “ತಂದೆ-ಮಗಳ ಹತ್ಯೆ ಪ್ರಕರಣ”- ಮೂವರನ್ನ ಬಂಧಿಸಿದ ಕಿತ್ತೂರು ಪೊಲೀಸರು…

Spread the love

38 ಗುಂಟೆ ಜಾಗಕ್ಕಾಗಿ ತಂದೆ-ಮಗಳ ಜೋಡಿ ಕೊಲೆ: ಮೂವರು ಆರೋಪಿಗಳ ಬಂಧನ

ಬೆಳಗಾವಿ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ಸೆಪ್ಟೆಂಬರ್ 16ರಂದು ಬೆಳಿಗ್ಗೆ 11.15ರ ಸುಮಾರಿಗೆ ಈ ಘಟನೆ ನಡೆದಿತ್ತು. ಮಾಜಿ ಯೋಧ ರುದ್ರಪ್ಪ ಕುಂದರಗಿ ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ ಕೊಲೆಯಾಗಿದ್ದರು.

ಆಸ್ತಿ ಹಂಚಿಕೆ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ನಡೆಯುತ್ತಿದ್ದ ವಿವಾದವೇ ಕೊಲೆಗೆ ಕಾರಣ ಎನ್ನಲಾಗಿದೆ. ಕೇವಲ 38 ಗುಂಟೆ ಜಮೀನಿನ ವಿಚಾರದಲ್ಲಿ ಉಂಟಾದ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಸಪ್ಪ ಕುಂದರಗಿ (65), ಸಂಗಪ್ಪ ಕುಂದರಗಿ (55) ಹಾಗೂ ಬಸಪ್ಪನ ಪುತ್ರ ಮಡಿವಾಳಪ್ಪ ಕುಂದರಗಿ (34) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಹ*ತ್ಯೆಯಾಗಿದ್ದನ್ನ ಕಣ್ಣಾರೆ ಕಂಡಿರುವ ಗ್ರಾಪಂನ ನೌಕರನ ಹೇಳಿಕೆ.

ಆರೋಪಿಗಳು ಕುಡಗೋಲಿನಿಂದ ಹಲ್ಲೆ ನಡೆಸಿ, ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ತಂದೆ-ಮಗಳನ್ನು ಕೊಲೆಗೈದಿದ್ದಾರೆ ಎನ್ನಲಾಗಿದೆ. ಕೃತ್ಯ ಎಸಗಿದ ಬಳಿಕ ಪರಾರಿಯಾಗಿದ್ದ ಆರೋಪಿಗಳನ್ನು ಕಿತ್ತೂರು ಪೊಲೀಸರು ಬಂಧಿಸಿ, ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

ಈ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಯ ಹಿಂದಿನ ಸಂಪೂರ್ಣ ಕಾರಣ ಹಾಗೂ ಘಟನೆಯ ಇತರೆ ವಿವರಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love

Leave a Reply

Your email address will not be published. Required fields are marked *

You may have missed