“ಪೈರೋಜ ಪಠಾಣ ಕಗ್ಗೊಲೆ”- ಮೈನು ನದಾಫನನ್ನ ಜೈಲಿಗಟ್ಟಿದ ಪೊಲೀಸರು…
ಧಾರವಾಡ: ನಗರದ ಹಾಸ್ಮಿ ನಗರದಲ್ಲಿ ಇತ್ತೀಚೆಗೆ ನಡೆದಿದ್ದ ಪೈರೋಜ ಪಠಾಣ ಎಂಬುವವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಕಾಂಗ್ರೆಸ್ ಮುಖಂಡ ಮೈನುದ್ದೀನ ನದಾಫ ಎಂಬುವವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕೆಲ ದಿನಗಳ ಹಿಂದೆ ಹಾಸ್ಮಿ ನಗರದಲ್ಲಿ ಪೈರೋಜ ಪಠಾಣ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆಯು ಅವಳಿ ನಗರದಲ್ಲಿ ತೀವ್ರ ಸಂಚಲನ ಮೂಡಿಸಿತ್ತಲ್ಲದೆ, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತ್ತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಪೊಲೀಸರು ವಿಶೇಷ ತಂಡವನ್ನು ರಚಿಸಿ ಹಂತಕರ ಪತ್ತೆಗೆ ಜಾಲ ಬೀಸಿದ್ದರು.
ಪೊಲೀಸರು ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಕಾರ್ಯಾಚರಣೆ ನಡೆಸುತ್ತಿದ್ದು, ಈಗಾಗಲೇ ಒಟ್ಟು 10 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಹತ್ಯೆಗೆ ನಿಖರವಾದ ಕಾರಣ ಮತ್ತು ಈ ಕೃತ್ಯದ ಹಿಂದೆ ಇರುವ ಇತರ ವ್ಯಕ್ತಿಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತ ಕಾಂಗ್ರೆಸ್ ಮುಖಂಡ ಮೈನುದ್ದೀನ ನದಾಫ ಈ ಪ್ರಕರಣದಲ್ಲಿ ಪಾತ್ರ ವಹಿಸಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಹೆಚ್ಚಿನ ವಿಚಾರಣೆ ಮುಂದುವರಿದಿದೆ.
ಪೊಲೀಸ್ ಮೂಲಗಳ ಮಾಹಿತಿ: “ಈಗಾಗಲೇ ಹತ್ತು ಮಂದಿಯನ್ನು ಬಂಧಿಸಲಾಗಿದ್ದು, ಕಾನೂನು ಪ್ರಕ್ರಿಯೆ ನಡೆಯುತ್ತಿದೆ. ಹತ್ಯೆಯ ಹಿಂದೆ ಯಾರೇ ಇದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು,” ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಆಡಳಿತ ಪಕ್ಷದ ಮುಖಂಡನೊಬ್ಬನ ಬಂಧನವಾಗಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕೊಲೆಯ ಹಿಂದೆ ಹಳೇ ದ್ವೇಷವಿದೆಯೇ ಅಥವಾ ಹಣಕಾಸಿನ ವ್ಯವಹಾರವಿದೆಯೇ ಎಂಬ ಆಯಾಮದಲ್ಲಿಯೂ ತನಿಖೆ ಚುರುಕುಗೊಂಡಿದೆ.
