ಧಾರವಾಡದಲ್ಲಿನ ಸರಕಾರಿ ಆದರ್ಶ ಶಾಲೆಯ ಹೆಡ್ಮಾಸ್ಟರ್ ಸುರೇಶ ಸನದಿ ಇನ್ನಿಲ್ಲ… ಶೋಕಸಾಗರದಲ್ಲಿ ಶಿಕ್ಷಕ ವೃಂದ, ವಿದ್ಯಾರ್ಥಿಗಳು…
ಧಾರವಾಡ: ಇಲ್ಲಿನ ತಾಲೂಕು ಸರಕಾರಿ ಆದರ್ಶ ಶಾಲೆಯ ಪ್ರಾಂಶುಪಾಲ ಸುರೇಶ ಸನದಿ ಅವರು ತೀವ್ರ ಅನಾರೋಗ್ಯದಿಂದ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಕೊನೆಯುಸಿರೆಳೆದಿದ್ದಾರೆ.

ತಿಂಗಳ ಹಿಂದೆ ಧಾರವಾಡದ ಕ್ಷೇತ್ರ ಶಿಕ್ಷಣಾಧಿಕಾರಿಗಳ (BEO) ಕಚೇರಿಯಲ್ಲಿ ಕರ್ತವ್ಯ ನಿರತರಾಗಿದ್ದ ವೇಳೆಯಲ್ಲಿಯೇ ಸನದಿ ಅವರಿಗೆ ತೀವ್ರ ತಲೆಸುತ್ತು ಬಂದು ಕುಸಿದುಬಿದ್ದಿದ್ದರು. ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಅವರು, ಕೊನೆಗೂ ಚಿಕಿತ್ಸೆಗೆ ಸ್ಪಂದಿಸದೇ ಇಹಲೋಕ ತ್ಯಜಿಸಿದ್ದಾರೆ.
ಇತ್ತೀಚಿಗಷ್ಟೇ ಶಿಕ್ಷಣ ಇಲಾಖೆಯ ಆಯುಕ್ತ ಈಶ್ವರ ಉಳ್ಳಾಗಡ್ಡಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ (DDPI) ಉಮೇಶ ಬೊಮ್ಮಕ್ಕನವರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಪ್ರಾಂಶುಪಾಲರ ಆರೋಗ್ಯ ವಿಚಾರಿಸಿ, ಸುಧಾರಿತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದರು.
ಅತ್ಯಂತ ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದ ಸುರೇಶ ಸನದಿ ಅವರು, ಸರಕಾರಿ ಆದರ್ಶ ಶಾಲೆಯ ಶೈಕ್ಷಣಿಕ ಪ್ರಗತಿಗೆ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದರು. ಪ್ರಾಂಶುಪಾಲರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಆದರ್ಶ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕಂಬನಿ ಮಿಡಿದಿದ್ದಾರೆ.
ಅಮೂಲ್ಯ ರತ್ನವೊಂದನ್ನು ಶಿಕ್ಷಣ ಕ್ಷೇತ್ರ ಕಳೆದುಕೊಂಡಂತಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಶಿಕ್ಷಣ ಇಲಾಖೆಯ ಪ್ರಮುಖರು ಶೋಕ ವ್ಯಕ್ತಪಡಿಸಿದ್ದಾರೆ.
