ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ವಿರುದ್ಧ FIR…

ಹುಬ್ಬಳ್ಳಿ: ನ್ಯಾಯಾಲಯದ ಆದೇಶದ ಮೇರೆಗೆ ಬಿಜೆಪಿ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆಯ ಜಾಗದ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ಜೀವ ಬೆದರಿಕೆಯನ್ನ ನೀಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.
ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ ಹಾನಗಲ್ ಮತ್ತು ಲಕ್ಷ್ಮಣ ಭೋವಿ ವಿರುದ್ಧ ಪ್ರಕರಣ ದಾಖಲಾಗಿದೆ. 2023 ಡಿ. 30 ರಂದು ಪೊಲೀಸ್ ಕಮೀಷನರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ ನಡೆದಿತ್ತು.
ಆನಂದನಗರದ ಕೃಷ್ಣಾ ಕಾಲೊನಿಗೆ ಸಂಬಂಧಪಟ್ಟ ಖಾಲಿ ಜಾಗವನ್ನು ಕೊಳಚೆ ನಿರ್ಮೂಲನ ಮಂಡಳಿ ಅಕ್ರಮವಾಗಿ ಹಕ್ಕುಪತ್ರ ವಿತರಿಸಿದೆ ಎಂಬ ದೂರು ಕೇಳಿ ಬಂದಿತ್ತು.
ಪರಶುರಾಮ ದಾವಣಗೆರೆ ಎಂಬುವರು ಆರ್ಟಿಐ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹಿಂಪಡೆಯುವಂತೆ ಲಕ್ಷ್ಮಣ ಭೋವಿ ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆಂದು ಪರಶುರಾಮ ನ್ಯಾಯಾಲಯದ ಮೂಲಕ ದೂರು ನೀಡಿದ್ದಾರೆ.
ಉಪ ಮೇಯರ್ ಮೇಯರ್ ಸತೀಶ ಹಾನಗಲ್ ಹಾಗೂ ಶಾಸಕ ಅರವಿಂದ ಬೆಲ್ಲದ ಕುಮ್ಮಕ್ಕಿನಿಂದ ಲಕ್ಷ್ಮಣ ಭೋವಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಲಾಗಿದೆ.
ಆರೋಪಿತರ ಮೇಲೆ ಕ್ರಮಕೈಗೊಳ್ಳಬೇಕೆಂದು 4 ನೇ ಎಸಿಜಿ ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುವಂತೆ ನ್ಯಾಯಾಲಯ ಸೂಚನೆ ಹಿನ್ನೆಲೆಯಲ್ಲಿ, ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.