ಎಂಎಲ್ಎ SDMC ಅಧ್ಯಕ್ಷರಾಗುವಂಗಿಲ್ಲ: ಮಹತ್ವದ ತೀರ್ಮಾನ…!

ಬೆಂಗಳೂರು: ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್.ಡಿ.ಎಂ.ಸಿ) ಅಧ್ಯಕ್ಷ ಸ್ಥಾನ ಕುರಿತಂತೆ ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದೆ.

ಈ ಕುರಿತಂತೆ ಈಗಾಗಲೇ ಸುತ್ತೋಲೆಯನ್ನು ಹೊರಡಿಸಲಾಗಿದೆ. ಈ ಮೊದಲು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳಿಗೆ ಆಯಾ ಕ್ಷೇತ್ರದ ಶಾಸಕರು ಅಧ್ಯಕ್ಷರಾಗಬೇಕು ಎಂಬ ನಿಯಮವಿದ್ದು, ಈಗ ಅದನ್ನು ಬದಲಿಸಿ ಆಯಾ ಪ್ರೌಢ ಶಾಲೆ, ಕಾಲೇಜುಗಳಲ್ಲಿ ಓದುತ್ತಿರುವ ಮಕ್ಕಳ ಪಾಲಕರಲ್ಲಿ ಒಬ್ಬರನ್ನು ಅಧ್ಯಕ್ಷರಾಗಿ ಮತ್ತೊಬ್ಬರನ್ನು ಕಾರ್ಯದರ್ಶಿಯಾಗಿ ನೇಮಕ ಮಾಡಲು ಸೂಚಿಸಲಾಗಿದೆ.
ಈಗಾಗಲೇ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಈ ನಿಯಮವಿದ್ದು, ಇದೀಗ ಅದನ್ನು ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳಿಗೂ ಅನ್ವಯಿಸಲಾಗುತ್ತಿದೆ. ಈ ಮೊದಲಿನ ನಿಯಮ ಶಾಲಾಭಿವೃದ್ಧಿಗೆ ಪೂರಕವಾಗಿಲ್ಲದ ಕಾರಣ ಅದನ್ನು ಬದಲಿಸಲಾಗಿದೆ ಎಂದು ತಿಳಿದುಬಂದಿದೆ.
ಶಾಲಾ ಅಭಿವೃದ್ಧಿ ಸಮಿತಿಯಲ್ಲೂ ಹಲವು ವಿವಾದಗಳು ಸೃಷ್ಟಿಯಾಗುತ್ತಿದ್ದ ಬೆನ್ನಲ್ಲೇ ಇಂತಹದೊಂದು ತೀರ್ಮಾನ ತೆಗೆದುಕೊಂಡಿರುವುದು ಉತ್ತಮವಾಗಿದೆ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ.