Karnataka Voice

Latest Kannada News

ನವಲಗುಂದ ಶಾಸಕರ ಕಚೇರಿ ಎದುರೇ “ಚಾಕು ಇರಿದುಕೊಂಡ ರೈತ” ಕಿಮ್ಸಗೆ ರವಾನೆ….

Spread the love

ನವಲಗುಂದ: ಆಸ್ತಿ ಮಾರಾಟದ ವಿಷಯವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ವ್ಯಕ್ತಿಯೊಬ್ಬ ಶಾಸಕರ ಕಚೇರಿ ಎದುರೇ ಏಕಾಏಕಿ ತನ್ನ ಹೊಟ್ಟೆಗೆ ಚಾಕು ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಸೋಮವಾರ ನಡೆದಿದೆ.

​ನವಲಗುಂದ ತಾಲೂಕಿನ ಪಡೇಸೂರ ಗ್ರಾಮದ ನಿವಾಸಿ ಮಹಾಂತೇಶ ತುರಮರಿ ಚಾಕು ಇರಿದುಕೊಂಡ ದುರ್ದೈವಿ.

​ಮಹಾಂತೇಶ ಇತ್ತೀಚೆಗೆ ತನ್ನ ಆಸ್ತಿಯನ್ನು ಮಾರಾಟ ಮಾಡಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ಇಂದು ನವಲಗುಂದ ತಾಲೂಕು ಪಂಚಾಯ್ತಿ ಆವರಣದಲ್ಲಿರುವ ನವಲಗುಂದ ಶಾಸಕ ಎನ್. ಎಚ್. ಕೋನರಡ್ಡಿ ಅವರ ಕಚೇರಿ ಎದುರು ಆಸ್ತಿ ಖರೀದಿ ಮಾಡಿದವರೊಂದಿಗೆ ಚರ್ಚೆ ನಡೆಯುತ್ತಿತ್ತು. ಈ ವೇಳೆ ಮಾತಿಗೆ ಮಾತು ಬೆಳೆದು ಚರ್ಚೆ ವಿಕೋಪಕ್ಕೆ ತಿರುಗಿದೆ. ಇದರಿಂದ ತೀವ್ರ ಆಕ್ರೋಶ ಹಾಗೂ ಮನನೊಂದ ಮಹಾಂತೇಶ, ಎಲ್ಲರ ನೋಡನೋಡುತ್ತಿದ್ದಂತೆ ಏಕಾಏಕಿ ತನ್ನ ಬಳಿ ಇದ್ದ ಚಾಕುವಿನಿಂದ ಹೊಟ್ಟೆಗೆ ಚುಚ್ಚಿಕೊಂಡಿದ್ದಾನೆ.

​ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಪೊಲೀಸರು ತಕ್ಷಣವೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಾಂತೇಶನನ್ನು ನವಲಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ, ಗಾಯದ ತೀವ್ರತೆ ಹೆಚ್ಚಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ನವಲಗುಂದ ಪೊಲೀಸರು ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸ್ (KIMS) ಆಸ್ಪತ್ರೆಗೆ ರವಾನಿಸಿದ್ದಾರೆ.

​ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ನವಲಗುಂದ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love

Leave a Reply

Your email address will not be published. Required fields are marked *