ಹುಬ್ಬಳ್ಳಿ: ಕಳ್ಳತನ ನಿಲ್ಲುತ್ತಿಲ್ಲ… ಕಳ್ಳರು ಸಿಗುತ್ತಿಲ್ಲ… ಆತಂಕದಲ್ಲಿ “825” ಕುಟುಂಬಗಳು… Exclusive
825 ಕುಟುಂಬಗಳಿಗೆ ಕಳ್ಳತನದ ಆತಂಕ: ಅಮರಗೋಳ ಆಶ್ರಯ ಕಾಲನಿಯಲ್ಲಿ ಪೊಲೀಸರ ಕಾರ್ಯವೈಖರಿ ಬಗ್ಗೆ ಪ್ರಶ್ನೆ
ಹುಬ್ಬಳ್ಳಿ: ಅಮರಗೋಳದ ಆಶ್ರಯ ಕಾಲನಿಯಲ್ಲಿ ಸರಣಿ ಕಳ್ಳತನ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸುಮಾರು 825 ಕುಟುಂಬಗಳು ಆತಂಕದಲ್ಲೇ ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬುದು ಸ್ಥಳೀಯರ ಆರೋಪ.
ಕಾಲನಿಯಲ್ಲಿ ಮನೆಗಳ ಕಳ್ಳತನದ ಘಟನೆಗಳು ನಡೆಯುತ್ತಿದ್ದು, ಈ ಕುರಿತು ಪೊಲೀಸ್ ಠಾಣೆಗೆ ದೂರುಗಳೂ ದಾಖಲಾಗಿವೆ. ಆದರೆ, ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಳಂಬ ಮಾಡುತ್ತಿದ್ದಾರೆ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವ ಬಗ್ಗೆ ದೂರು ನೀಡಿದ್ದರೂ, ಕಳ್ಳತನಕ್ಕೆ ಕಡಿವಾಣ ಬೀಳದಿರುವುದು ನಿವಾಸಿಗಳ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
“ಕಳ್ಳತನ ನಿಲ್ಲುತ್ತಿಲ್ಲ, ಕಳ್ಳರು ಸಿಗುತ್ತಿಲ್ಲ. ರಾತ್ರಿ ವೇಳೆ ಮನೆಯಿಂದ ಹೊರಗೆ ಹೋಗಲೂ ಭಯವಾಗುತ್ತಿದೆ” ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.
ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಕಾಲನಿಯಲ್ಲಿ ರಾತ್ರಿ ಗಸ್ತು ಹೆಚ್ಚಿಸುವುದು, ಹಿಂದಿನ ಪ್ರಕರಣಗಳ ತನಿಖೆಯನ್ನು ಚುರುಕುಗೊಳಿಸುವುದು ಹಾಗೂ ಕಳ್ಳತನದಲ್ಲಿ ಭಾಗಿಯಾಗಿರುವವರನ್ನು ಪತ್ತೆಹಚ್ಚಿ ಬಂಧಿಸುವ ಮೂಲಕ ನಿವಾಸಿಗಳಿಗೆ ಭದ್ರತೆಯ ಭರವಸೆ ನೀಡಬೇಕು ಎಂಬುದು ಸ್ಥಳೀಯರ ಆಗ್ರಹ.
825 ಕುಟುಂಬಗಳ ಸುರಕ್ಷತೆಯ ಪ್ರಶ್ನೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಕಮೀಷನರ್ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ.
